ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ ನಡೆದಿದೆ. ವಾಂತಿ–ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಕ್ಕಳನ್ನು ತಕ್ಷಣ ಔರಾದ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ಪಡೆದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದ ನಂತರ ಅವರು ಘಟನೆ ನಡೆದ ಜಮಲಾಪುರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ ಬದೋಲೆ, ತಹಸೀಲ್ದಾರ್ ಮಹೇಶ ಪಾಟೀಲ್, ತಾಲೂಕು ವೈದ್ಯಾಧಿಕಾರಿ ಡಾ. ಗಾಯತ್ರಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
ಅಸ್ವಸ್ಥ ಮಕ್ಕಳನ್ನು ಭೇಟಿ ಮಾಡಿದ ಶಾಸಕ ಪ್ರಭು ಬಿ. ಚವ್ಹಾಣ ಅವರು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆಯ ವಿವರಗಳನ್ನು ಪಡೆದು, ಮಕ್ಕಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಉತ್ತಮ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚವ್ಹಾಣ, “ಬಿಸಿಯೂಟ ಸೇವಿಸಿದ ನಂತರ ಕೆಲವು ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದೆ. ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ನಿರಂತರವಾಗಿ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಸದ್ಯಕ್ಕೆ ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ” ಎಂದು ಹೇಳಿದರು.
ಇದೇ ವೇಳೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಔರಾದ್ (ಬಿ) ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು. “ಕಾಲಕಾಲಕ್ಕೆ ಕ್ಷೇತ್ರಕ್ಕೆ ಭೇಟಿ ನೀಡದ ಕಾರಣ ಅಧಿಕಾರಿಗಳ ಮೇಲೆ ನಿಯಂತ್ರಣ ಕಾಣಿಸುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಅಕ್ಷರ ದಾಸೋಹ ಯೋಜನೆಯ ಅಧಿಕಾರಿಗಳ ವೈಫಲ್ಯವೂ ಈ ಘಟನೆಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕಲುಷಿತ ಆಹಾರ ಪೂರೈಕೆ ಕಾರಣಗಳ ಬಗ್ಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ