Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಜೂನ್ ಒಳಗೆ ತುಂಗಭದ್ರಾ ಗೇಟ್ ಕೆಲಸ ಪೂರ್ಣ: ಅಂಬಾ ಜಾತ್ರಾ ಮಹೋತ್ಸವದಲ್ಲಿ ಸಿಎಂ

ಜೂನ್ ಒಳಗೆ ತುಂಗಭದ್ರಾ ಗೇಟ್ ಕೆಲಸ ಪೂರ್ಣ: ಅಂಬಾ ಜಾತ್ರಾ ಮಹೋತ್ಸವದಲ್ಲಿ ಸಿಎಂ

ಸಿಂಧನೂರು (ರಾಯಚೂರು): ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವ ಅವಕಾಶ ದೊರೆತಿದ್ದು, ತಾಯಿಯ ದರ್ಶನವಾಗಿರುವುದು ನನ್ನ ಪುಣ್ಯ ಎಂದು ಮುಖ್ಯಮಂತ್ರಿ ಹೇಳಿದರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಶ್ರೀ ಅಂಬಾಮಠದಲ್ಲಿ ಆಯೋಜಿಸಿದ್ದ ಶ್ರೀ ಅಂಬಾ ಮಹೋತ್ಸವ–2026 ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಾಲಗುಂದಾ ಏತ ನೀರಾವರಿ, ಮುಳ್ಳೂರು ಏತ ನೀರಾವರಿ ಹಾಗೂ ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ಸರ್ಕಾರ ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ವಿವಿಧ ನಿಗಮಗಳಡಿ ಒಟ್ಟು ₹176 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಸಾಲಗುಂದಾ ಏತ ನೀರಾವರಿ ಯೋಜನೆಗೆ ₹71 ಕೋಟಿ, ಮುಳ್ಳೂರು ಏತ ನೀರಾವರಿಗೆ ₹21 ಕೋಟಿ, ವಳಬಳ್ಳಾರಿ ಏತ ನೀರಾವರಿಗೆ ₹43 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ. ಹಂಪನಗೌಡ ಬಾದರ್ಲಿ ಅವರು ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಗುರಿ ಹೊಂದಿದ್ದು, ಈಗಾಗಲೇ 30 ಲಕ್ಷ ಹೆಕ್ಟೇರ್‌ಗೂ ಅಧಿಕ ಪ್ರದೇಶಕ್ಕೆ ನೀರು ಒದಗಿಸಲಾಗಿದೆ. ಉಳಿದ 12 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ತಲುಪಿಸುವ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಸಾಗುತ್ತಿವೆ ಎಂದರು.

₹431 ಕೋಟಿ ವೆಚ್ಚದಲ್ಲಿ ಪಾಪಯ್ಯ ಟನಲ್ ಹಾಗೂ ಕಾಲುವೆ ಅಭಿವೃದ್ಧಿ, ಜೊತೆಗೆ ತುಂಗಭದ್ರಾ ಜಲಾಶಯದ 33 ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಜೂನ್ ಒಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಬೆಳೆಗೆ ನೀರು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಎಷ್ಟೇ ವೆಚ್ಚವಾದರೂ ಹೊಸ ಗೇಟ್‌ಗಳನ್ನು ಅಳವಡಿಸಿ ರೈತರಿಗೆ ನೀರು ಒದಗಿಸಲಾಗುವುದು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ ಅವರು, ಗ್ಯಾರಂಟಿಗಳಿಗೆ ₹1.12 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ ಎಂದರು. ಶಕ್ತಿ ಯೋಜನೆಯಡಿ 643 ಕೋಟಿ ಬಾರಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದು, ಇದಕ್ಕಾಗಿ ಸುಮಾರು ₹16 ಸಾವಿರ ಕೋಟಿ ವೆಚ್ಚವಾಗಿದೆ. ಈ ವರ್ಷ ಒಟ್ಟಾರೆ ₹52 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಕರ್ನಾಟಕವು ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ರಾಜ್ಯವಾಗಿರುವುದರಿಂದ, ಹೆಚ್ಚಿನ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡು ರಾಜ್ಯವನ್ನು ಹಸಿರು ವಲಯವನ್ನಾಗಿ ಮಾಡುವುದು ಸರ್ಕಾರದ ಉದ್ದೇಶ ಎಂದು ತಿಳಿಸಿದರು. ಸಿಂಧನೂರು ಮಾತ್ರವಲ್ಲದೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಚುರುಕುಗೊಳಿಸಲಾಗುತ್ತಿದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, 2003ರಲ್ಲಿ ನ್ಯಾಯ ದೊರೆತಿದ್ದರೂ 173 ಟಿಎಂಸಿ ನೀರಿನ ಬಳಕೆಗೆ ಅವಕಾಶ ನೀಡಬೇಕಿದೆ ಎಂದು ಹೇಳಿದರು. ಈ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ ಎಂದರು.

ನೀರಾವರಿ ಯೋಜನೆಗಳ ಮೂಲಕ ಕಟ್ಟಕಡೆಯ ಭಾಗದ ರೈತರಿಗೆ ಆದಷ್ಟು ಬೇಗ ನೀರು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ದೇವಸ್ಥಾನ ಅಭಿವೃದ್ಧಿಗೆ ಮೊದಲ ಹಂತದಲ್ಲಿ ₹6.30 ಕೋಟಿ ಅನುದಾನ ನೀಡಲಾಗಿದ್ದು, ಅದರಲ್ಲಿ ₹2 ಕೋಟಿ ಈಗಾಗಲೇ ವೆಚ್ಚವಾಗಿದೆ. ಉಳಿದ ಅನುದಾನವೂ ಬಿಡುಗಡೆ ಮಾಡಲಾಗುವುದು ಎಂದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಮನರೇಗಾ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೊಳಿಸಿರುವ ವಿಬಿಜಿ ರಾಮ್ ಜಿ ಕಾಯ್ದೆ ಬಡವರು, ಮಹಿಳೆಯರು, ದಲಿತರು ಹಾಗೂ ಸಣ್ಣ ರೈತರಿಗೆ ತೀವ್ರ ತೊಂದರೆ ಉಂಟುಮಾಡಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಹಿಂದಿನಂತೆ ಕೇಂದ್ರ ಸರ್ಕಾರ ಶೇ.100 ಅನುದಾನ ನೀಡುತ್ತಿದ್ದ ವ್ಯವಸ್ಥೆಯನ್ನು ಬದಲಿಸಿ, ಈಗ ಕೇಂದ್ರ 60% ಮತ್ತು ರಾಜ್ಯ 40% ವೆಚ್ಚ ಭರಿಸುವ ನಿಯಮ ಒಕ್ಕೂಟ ತತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

ಮನರೇಗಾ ಕಾನೂನನ್ನು ಪುನರ್ ಸ್ಥಾಪಿಸಬೇಕು ಎಂಬುದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು ಎಂದು ತಿಳಿಸಿದ ಅವರು, ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದರು.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading