Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಉಳ್ಳಾಲ: ತಾಲೂಕಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಪ್ರದೇಶದಲ್ಲಿ ಕಳೆದ ಹಲವು ತಿಂಗಳುಗಳಿಂದ ಕೊಳಚೆ ನೀರು ಶೇಖರಣೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ದುರ್ವಾಸನೆ ಹಾಗೂ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಉಳ್ಳಾಲ ವಲಯ ಸಮಿತಿ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಸೋಮವಾರ (26-05-2026) ಉಳ್ಳಾಲ ತಾಲೂಕು ತಹಶೀಲ್ದಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಬೆಳ್ಮ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಪ್ರತ್ಯೇಕ ಮನವಿಗಳನ್ನು ನೀಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಮುಂಭಾಗದ ರಸ್ತೆ ಬೆಳ್ಮ ಗ್ರಾಮ ಪಂಚಾಯತ್ ಮತ್ತು ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. ಈ ಭಾಗದಲ್ಲಿರುವ ಲಾಡ್ಜ್‌ಗಳು ಹಾಗೂ ವಾಣಿಜ್ಯ ಸಂಕೀರ್ಣಗಳಿಂದ ಹೊರಬರುವ ಡ್ರೈನೇಜ್ ನೀರು ರಸ್ತೆಯ ಅಡಿಭಾಗದಲ್ಲಿ ಹರಿದು ಆಸ್ಪತ್ರೆ ಸಮೀಪಕ್ಕೆ ಬರುತ್ತಿದೆ. ಆದರೆ ಆಸ್ಪತ್ರೆಯ ಮುಖ್ಯ ದ್ವಾರದ ಬಳಿಯೇ ನೀರಿನ ಹರಿವು ತಡೆಗಟ್ಟಲ್ಪಟ್ಟಿರುವುದರಿಂದ ಕೊಳಚೆ ನೀರು ನಿಂತು ದುರ್ವಾಸನೆ ವ್ಯಾಪಕವಾಗಿ ಹರಡುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ಇದರಿಂದ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ಅಟೋರಿಕ್ಷಾ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮೀಪದಲ್ಲಿರುವ ಅಟೋರಿಕ್ಷಾ ನಿಲ್ದಾಣದಲ್ಲಿ 50ಕ್ಕೂ ಹೆಚ್ಚು ಚಾಲಕರು ಕಾರ್ಯನಿರ್ವಹಿಸುತ್ತಿದ್ದು, ದುರ್ವಾಸನೆಯ ನಡುವೆ ಕೆಲಸ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಅವರು ಹೇಳಿದ್ದಾರೆ.

ಕೊಳಚೆ ನೀರಿನ ಸಮಸ್ಯೆಯಿಂದ ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಿಪಿಐ(ಎಂ) ಆಗ್ರಹಿಸಿದೆ. ಹಲವು ಬಾರಿ ಸ್ಥಳೀಯರು ದೂರು ನೀಡಿದರೂ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಮನವಿ ಸಲ್ಲಿಸುವ ವೇಳೆ ಸಿಪಿಐ(ಎಂ) ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಹಿರಿಯ ಕಮ್ಯುನಿಸ್ಟ್ ಮುಖಂಡ ಕೃಷ್ಣಪ್ಪ ಸಾಲ್ಯಾನ್, ಜನಾರ್ಧನ ಕುತ್ತಾರ್, ಇಬ್ರಾಹಿಂ ಅಂಬ್ಲಮೊಗರು, ಸದಾಶಿವ ಕುತ್ತಾರ್, ಡಿವೈಎಫ್‌ಐ ಜಿಲ್ಲಾ ನಾಯಕ ರಜಾಕ್ ಮುಡಿಪು ಹಾಗೂ ಸಿಐಟಿಯು ಮುಖಂಡ ಜಗದೀಶ್ ಉಪಸ್ಥಿತರಿದ್ದರು.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading