ಮಂಗಳೂರು: ಪ್ರೀತಿ ಬದುಕಿಗೆ ದಾರಿಯಾಗಬೇಕಾದರೆ, ಇಲ್ಲೊಬ್ಬ ಯುವಕನ ಪಾಲಿಗೆ ಅದೇ ಪ್ರೀತಿ ಮರಣಕ್ಕೆ ಕಾರಣವಾದ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾರದೆ 22 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮಂಗಳೂರಿನ ಮೂಡುಶೆಡ್ಡೆ ಎದುರುಪದವು ನಿವಾಸಿಯಾದ ಮುಹಮ್ಮದ್ ಆಶಿಕ್ (22) ಅವರು ಕಳೆದ ಮಾರ್ಚ್ 21ರ ಮಧ್ಯರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಸಾವಿನ ನಿಖರ ಕಾರಣ ತಿಳಿದಿರಲಿಲ್ಲ. ಆದರೆ ನಂತರ ಆಶಿಕ್ ಅವರ ಮೊಬೈಲ್ ಪರಿಶೀಲಿಸಿದಾಗ ಹಲವು ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ.
ಆಶಿಕ್ ನಗರದ ಕೂಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ, ಅದೇ ಕಾಲೇಜಿನ ಸಮೀಯ ಸಬಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದರು. ಕೆಲಕಾಲ ಇಬ್ಬರ ನಡುವೆ ಆಪ್ತ ಸಂಬಂಧವಿದ್ದರೂ, ಇತ್ತೀಚಿನ ದಿನಗಳಲ್ಲಿ ಯುವತಿ ದೂರವಾಗತೊಡಗಿದ್ದಳು ಎನ್ನಲಾಗಿದೆ. ಜೊತೆಗೆ, ಆತನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ.
ಈ ಕುರಿತು ಆಶಿಕ್ ತಂದೆ ಮುಹಮ್ಮದ್ ಹನೀಫ್ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಬಾಳ ಕಿರುಕುಳವೇ ತಮ್ಮ ಮಗನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. “ನೀನು ಎಲ್ಲಿಯಾದರೂ ಹೋಗಿ ಸಾಯಿ” ಎಂದು ಹೇಳುವುದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಷ್ಟೇ ಅಲ್ಲದೆ, ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲೂ ಆಶಿಕ್ ವೀಡಿಯೋ ಕಾಲ್ನಲ್ಲಿ ಇದ್ದು, ಆ ವೇಳೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂಬ ಗಂಭೀರ ಆರೋಪ ಕೂಡ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಚಾಟ್ಗಳು ಹಾಗೂ ವೀಡಿಯೋ ಕಾಲ್ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸದ್ಯ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ಆಕ್ರೋಶಕ್ಕೆ ಕಾರಣವಾಗಿದ್ದು, ಮೃತ ಯುವಕನ ಕುಟುಂಬಕ್ಕೆ ನ್ಯಾಯ ಸಿಗಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.
