ಬೀದರ್: ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಟ್ಯೂಟರ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಜಯಸಿಂಗ್ ಅವರು ಸರ್ಕಾರದ ನಿಯಮಾವಳಿಗಳಿಗೆ ವಿರುದ್ಧವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಆರೋಪಿಸಿ, ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ಸೇನೆ ಆಗ್ರಹಿಸಿದೆ.
ಬ್ರಿಮ್ಸ್ ನಿರ್ದೇಶಕರ ಮೂಲಕ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಡಾ. ಜಯಸಿಂಗ್ ಅವರು 2018–19ನೇ ಸಾಲಿನೊಳಗಾಗಿ ಸ್ನಾತಕೋತ್ತರ ಪದವಿ ಪಡೆಯುವುದು ಕಡ್ಡಾಯವಾಗಿದ್ದರೂ ಇದುವರೆಗೆ ಆ ಅರ್ಹತೆ ಪಡೆದಿಲ್ಲ ಎಂದು ದೂರಲಾಗಿದೆ. ನಿಗದಿತ ಅವಧಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯದಿದ್ದಲ್ಲಿ ಸೇವೆಯಿಂದ ಬಿಡುಗಡೆಗೊಳಿಸುವ ಷರತ್ತಿನೊಂದಿಗೆ ಎಐಸಿಟಿಇ ವೇತನ ಶ್ರೇಣಿಯಲ್ಲಿ ನೇಮಕಾತಿ ನೀಡಲಾಗಿತ್ತು ಎಂಬುದನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ 19ನೇ ಆಡಳಿತ ಮಂಡಳಿಯ ನಿರ್ಧಾರದಂತೆ ಆಡಳಿತಾತ್ಮಕ ಕಚೇರಿಯಲ್ಲಿ ಯಾವುದೇ ಕಾರ್ಯ ನಿರ್ವಹಿಸಬಾರದು ಎಂಬ ನಿಯಮವಿದ್ದರೂ, ಅದನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸರ್ಕಾರದ ಆದೇಶಗಳನ್ನು ಪಾಲಿಸದೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಪ್ಪು ಮಾಹಿತಿ ನೀಡಿ ಕರ್ತವ್ಯ ಲೋಪ ಎಸಗುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಈ ಕುರಿತು ಬ್ರಿಮ್ಸ್ ನಿರ್ದೇಶಕರು ಇದುವರೆಗೆ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಸೇನೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೇ ಡಾ. ಜಯಸಿಂಗ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದೆ. ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಬ್ರಿಮ್ಸ್ ಎದುರು ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ವರದಿ:ಅರವಿಂದ ಮಲ್ಲೀಗೆ