Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಶಾಸಕ ಪ್ರಭು ಚೌಹಾಣ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ಖಂಡನೆ

ಶಾಸಕ ಪ್ರಭು ಚೌಹಾಣ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ಖಂಡನೆ

ಔರಾದ: ಔರಾದ ತಾಲೂಕು ಆಡಳಿತ ವತಿಯಿಂದ ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಪ್ರಭು ಚೌಹಾಣ್ ಅವರು ಸಂಘಟನೆಗಳ ಮುಖಂಡರು ಹಾಗೂ ಪತ್ರಕರ್ತರ ಬಗ್ಗೆ ಹಗುರವಾಗಿ ಮತ್ತು ಬೆದರಿಕೆ ಸ್ವರದಲ್ಲಿ ಮಾತನಾಡಿರುವುದನ್ನು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ತೀವ್ರವಾಗಿ ಖಂಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಪ್ರಭು ಚೌಹಾಣ್ ಅವರು, ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಮಾಹಿತಿ ಕೇಳುವ ಕೆಲವು ಸಂಘಟನೆಗಳ ಮುಖಂಡರು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಇವರೊಂದಿಗೆ ಪತ್ರಕರ್ತರು ಸೇರಿಕೊಂಡು ಸುದ್ದಿಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇಂತಹ ಸುದ್ದಿಗಳನ್ನು ಮಾಡಿದರೆ ನಿಮ್ಮ ವಿರುದ್ಧ ಕೇಸ್ ದಾಖಲಿಸುತ್ತೇನೆ ಎಂದು ಪತ್ರಕರ್ತರಿಗೆ ಏರುಧ್ವನಿಯಲ್ಲಿ ಎಚ್ಚರಿಕೆ ನೀಡಿದರು ಎನ್ನಲಾಗಿದೆ.

ಶಾಸಕರ ಹೇಳಿಕೆಯ ಪ್ರಕಾರ, ಮಾಹಿತಿ ಹಕ್ಕು ಕಾಯ್ದೆಯಡಿ ತಾಲೂಕಿನಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿಗಳನ್ನು ಪ್ರಶ್ನಿಸುವ ಸಂಘಟನೆಗಳು ಹಾಗೂ ಮಾಹಿತಿ ಪಡೆದು ನ್ಯಾಯಾಲಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸುವವರು ದೇಶದ್ರೋಹಿಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇಂತಹವರ ಸುದ್ದಿಯನ್ನು ಮಾಡುವ ಪತ್ರಕರ್ತರನ್ನು ವಿರೋಧಿಗಳೆಂದು ಕರೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಸುಧಾಕರ ಕೊಳ್ಳುರ ಅವರು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಮಾನವಾಗಿದ್ದು, ಕೂಡಲೇ ಶಾಸಕ ಪ್ರಭು ಚೌಹಾಣ್ ಅವರು ಪತ್ರಕರ್ತರು ಹಾಗೂ ಸಂಘಟನೆಗಳ ಮುಖಂಡರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ತಾಲೂಕಿನಲ್ಲಿ ನಾಲ್ಕನೇ ಅವಧಿಗೆ ಶಾಸಕರಾಗಿರುವ ಪ್ರಭು ಚೌಹಾಣ್ ಅವರು ಇಲ್ಲಿಯವರೆಗೆ ಯಾವುದೇ ಗಮನಾರ್ಹ ಅಭಿವೃದ್ಧಿ ಕೆಲಸ ಮಾಡಿಲ್ಲ. ಬಹುತೇಕ ಕಾಮಗಾರಿಗಳಲ್ಲಿ ಕಮಿಷನ್ ರಾಜಕಾರಣ ನಡೆಯುತ್ತಿದ್ದು, ಕಳಪೆ ಕಾಮಗಾರಿಗಳಿಗೆ ಶಾಸಕರೇ ನೇರ ಹೊಣೆ ಎಂದು ಆರೋಪಿಸಿದರು.

ತಾಲೂಕಿನಲ್ಲಿ ಜಲಜೀವನ್ ಮಿಷನ್ (JJM) ಕಾಮಗಾರಿ ಸಂಪೂರ್ಣವಾಗಿ ವಿಫಲವಾಗಲು ಶಾಸಕರೇ ಪ್ರಮುಖ ಕಾರಣರಾಗಿದ್ದಾರೆ ಎಂದು ಸುಧಾಕರ ಕೊಳ್ಳುರ ಆರೋಪಿಸಿದರು.

ಸರ್ಕಾರಿ ಕಾರ್ಯಕ್ರಮಗಳ ವೇದಿಕೆಯನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸುವ ಬದಲು, ಬಹಿರಂಗ ಚರ್ಚೆಗೆ ಬರಲಿ. ಅವರ ಅವಧಿಯಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ, ಎಷ್ಟು ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನಾವು ದಾಖಲೆಗಳೊಂದಿಗೆ ಸಾಬೀತುಪಡಿಸುತ್ತೇವೆ ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಹಿಂದುಳಿದ ತಾಲೂಕು ಎಂಬ ಕಾರಣಕ್ಕೆ ಸರ್ಕಾರ ರೂಪಿಸಿದ ಯೋಜನೆಗಳಡಿ ಕೋಟ್ಯಾಂತರ ರೂಪಾಯಿ ಬಿಡುಗಡೆಗೊಂಡಿದ್ದರೂ, ಅವುಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಬದಲು ಸ್ಥಳೀಯ ಶಾಸಕರು ನುಂಗಿ ನೀರು ಕುಡಿದಿದ್ದಾರೆ ಎಂದು ಆರೋಪಿಸಿದರು. ಇಂತಹ ಅಕ್ರಮಗಳನ್ನು ಪ್ರಶ್ನಿಸುವ ಸಂಘಟನೆಗಳು ಹಾಗೂ ಪತ್ರಕರ್ತರಿಗೆ ಸರ್ಕಾರಿ ಕಾರ್ಯಕ್ರಮದ ವೇದಿಕೆಯಿಂದಲೇ ಧಮ್ಕಿ ಹಾಕುವುದು ಎಷ್ಟರ ಮಟ್ಟಿಗೆ ಸರಿ ಎಂದು ಸುಧಾಕರ ಕೊಳ್ಳುರ ಪ್ರಶ್ನಿಸಿದರು.

ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
0
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading