ಮಂಗಳೂರು: ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕು. ಇಲ್ಲದಿದ್ದಲ್ಲಿ ಬಿಜೆಪಿ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತ ಸಮಾಜಕ್ಕೆ ಸೇರಿದ ವ್ಯಕ್ತಿಗಳ ಗೌರವಕ್ಕೆ ಧಕ್ಕೆಯಾಗುವ ಯಾವುದೇ ಕೃತ್ಯಗಳನ್ನು ಬಿಜೆಪಿ ಎಂದಿಗೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂತಹ ಗಂಭೀರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಮೌನವನ್ನು ಪ್ರಶ್ನಿಸಿದ ವೇದವ್ಯಾಸ್ ಕಾಮತ್, “ಸಂವಿಧಾನದ ಪುಸ್ತಕವನ್ನು ಹಿಡಿದು ರಾಜಕೀಯ ಮಾಡುವ ಕಾಂಗ್ರೆಸ್ ನಾಯಕರು, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಮೇಲಕ್ಕೆ ಬಂದ ದಲಿತ ಮಹಿಳೆಗೆ ಇಂತಹ ಅವಮಾನವಾದಾಗ, ಏಕೆ ಒಬ್ಬರೂ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದರು.
ಅವರು ಮುಂದುವರಿದು, “ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ವ್ಯಕ್ತಿಗೆ ಕಾಂಗ್ರೆಸ್ ಪಕ್ಷವೇ ರಕ್ಷಣೆ ನೀಡುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ಆರೋಪಿಯನ್ನು ಬಂಧಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.