ಬೆಂಗಳೂರು: ಭಾರತದ ವಾಯವ್ಯ ಭಾಗದ ಪಾಕಿಸ್ತಾನ ಮಾರ್ಗವಾಗಿ ಭಾರಿ ಶೀತ ಮಾರುತಗಳು ಬೀಸುತ್ತಿರುವ ಹಿನ್ನೆಲೆಯಲ್ಲಿ, ಜಮ್ಮು–ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜನವರಿ 23ರಿಂದ ವಾತಾವರಣದ ಉಷ್ಣಾಂಶದಲ್ಲಿ ತೀವ್ರ ಕುಸಿತ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ವಾಯುಭಾರ ಕುಸಿತದ ಲಕ್ಷಣಗಳೂ ಕಾಣಿಸಿಕೊಳ್ಳುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಅದೇ ವೇಳೆ, ಅರಬ್ಬಿ ಸಮುದ್ರದ ಮೂಲಕ ಉತ್ತರ ಭಾರತ ಕಡೆಗೆ ಬೀಸುತ್ತಿರುವ ತೇವಾಂಶಭರಿತ ಗಾಳಿಯ ಪರಿಣಾಮವಾಗಿ ದೆಹಲಿ, ಹರಿಯಾಣ, ಪಂಜಾಬ್, ರಾಜಸ್ಥಾನ, ಗುಜರಾತ್, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದ ಕೆಲ ಭಾಗಗಳಲ್ಲಿ ಜನವರಿ 24 ಮತ್ತು 25ರಂದು ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ತಾಪಮಾನ ಮತ್ತಷ್ಟು ಇಳಿಯುವ ಸಾಧ್ಯತೆ ಇದ್ದು, ಜನರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.
ಇನ್ನೊಂದೆಡೆ, ಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತಗಳ ಪರಿಚಲನೆ (ಎಂಟಿ ಸೈಕ್ಲೋನಿಕ್ ಸರ್ಕುಲೇಶನ್) ಉಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದರ ಪರಿಣಾಮವಾಗಿ ತಮಿಳುನಾಡು ಮೂಲಕ ತೇವಾಂಶಭರಿತ ಗಾಳಿಗಳು ದಕ್ಷಿಣ ಭಾರತದ ಕಡೆಗೆ ಹರಿಯಲಿದ್ದು, ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಜನವರಿ 24ರಿಂದ 26ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಉತ್ತರ ಭಾರತದ ಪರ್ವತ ಪ್ರದೇಶಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ದಕ್ಷಿಣ ಭಾರತದಲ್ಲಿ ರೈತರು ಹಾಗೂ ಸಾರ್ವಜನಿಕರು ಹವಾಮಾನ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.