ಪುತ್ತೂರು: ಪುತ್ತೂರು ಸಿವಿಲ್ ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನ್ಯಾಯಾಲಯದೊಳಗೆ ಏಕಾಏಕಿ ಪ್ರವೇಶಿಸಿದ ವ್ಯಕ್ತಿ ನ್ಯಾಯಾಧೀಶರ ಎದುರೇ ವಿಷ ಪದಾರ್ಥ ಸೇವಿಸಿದ್ದರಿಂದ ಕೆಲಕಾಲ ನ್ಯಾಯಾಲಯದ ವಾತಾವರಣ ಗಲಿಬಿಲಿಗೊಂಡಿತು.
ದಿಢೀರನೆ ನಡೆದ ಈ ಘಟನೆಯಿಂದ ನ್ಯಾಯಾಲಯದ ಕಲಾಪವನ್ನು ತಾತ್ಕಾಲಿಕವಾಗಿ ಮುಂದೂಡಲಾಯಿತು. ನ್ಯಾಯಾಲಯದ ಸಿಬ್ಬಂದಿಗಳು ಹಾಗೂ ಪೊಲೀಸರು ತಕ್ಷಣವೇ ಅಸ್ವಸ್ಥಗೊಂಡ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ.
ವಿಷ ಸೇವನೆಗೆ ಯತ್ನಿಸಿದ ವ್ಯಕ್ತಿಯನ್ನು ಕಾವು ಗ್ರಾಮದ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಪತಿ–ಪತ್ನಿ ನಡುವಿನ ತಕರಾರು ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಒಂದು ಕೇಸಿನಲ್ಲಿ ತನಗೆ ನ್ಯಾಯ ಸಿಗುತ್ತಿಲ್ಲ ಎಂಬ ಮನೋವೇದನೆಯಿಂದ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ರವಿ ವಿರುದ್ಧ ಆತ್ಮಹತ್ಯೆ ಯತ್ನದ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.