Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮಂಗಳೂರಿನಲ್ಲಿ ಅಖಿಲ ಭಾರತ ಮಹಾಮುಷ್ಕರ

ಮಂಗಳೂರಿನಲ್ಲಿ ಅಖಿಲ ಭಾರತ ಮಹಾಮುಷ್ಕರ

ಕಾರ್ಮಿಕ ಸಂಹಿತೆಗಳ ವಿರುದ್ಧ ರಸ್ತೆತಡೆ, ಭಾರಿ ಪ್ರತಿಭಟನೆ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್‌ಗಳ ವಿರುದ್ಧ ಇಂದು (ಫೆಬ್ರವರಿ 12) ರೈತ-ಕಾರ್ಮಿಕರ ನೇತೃತ್ವದಲ್ಲಿ ನಡೆದ ಅಖಿಲ ಭಾರತ ಮಹಾಮುಷ್ಕರ ಮಂಗಳೂರಿನಲ್ಲಿ ಭಾರೀ ಯಶಸ್ಸಿನೊಂದಿಗೆ ಜರುಗಿತು. ನಗರದ ಹೃದಯಭಾಗವಾದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ಸಂಘಟನೆಗಳ ಕಾರ್ಮಿಕರು, ನೌಕರರು ಹಾಗೂ ರೈತರು ಒಂದಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದರು.
500ಕ್ಕೂ ಹೆಚ್ಚು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಲೇಬರ್ ಕೋಡ್‌ಗಳನ್ನು ತಕ್ಷಣ ವಾಪಸ್ ಪಡೆಯುವಂತೆ ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು, ದೇಶಕ್ಕೆ “ಅಚ್ಛೇ ದಿನ್” ತರುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ ಕಳೆದ ಹಲವು ವರ್ಷಗಳಲ್ಲಿ ಸಾರ್ವಜನಿಕ ಸಂಪತ್ತನ್ನು ಕಾರ್ಪೊರೇಟ್‌ಗಳ ಪರವಾಗಿ ಬಳಸಿಕೊಂಡಿದ್ದು, ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದರು. ದೇಶದ 90 ಶೇಕಡಾ ಕಾರ್ಮಿಕರಿಗೆ ರಕ್ಷಣೆಯಿಲ್ಲದ ಲೇಬರ್ ಕೋಡ್‌ಗಳು ವಾಸ್ತವವಾಗಿ ಕಾರ್ಪೊರೇಟ್ ಕೋಡ್‌ಗಳೇ ಎಂದು ಅವರು ಪ್ರಶ್ನಿಸಿದರು. ಲೇಬರ್ ಕೋಡ್‌, ರೈತ ವಿರೋಧಿ ಬೀಜ ಮಸೂದೆ ಮತ್ತು ವಿದ್ಯುತ್ ಮಸೂದೆಗಳನ್ನು ತಕ್ಷಣ ವಾಪಸ್ ಪಡೆಯದಿದ್ದರೆ ಇನ್ನಷ್ಟು ತೀವ್ರ ಹೋರಾಟಗಳನ್ನು ನಡೆಸುವುದಾಗಿ ಎಚ್ಚರಿಸಿದರು.
AITUC ಜಿಲ್ಲಾ ನಾಯಕ ಎಚ್.ವಿ. ರಾವ್ ಅವರು ಮಾತನಾಡಿ, ಗ್ರಾಮೀಣ ಜನರ ಜೀವನಾಧಾರವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯ ಸ್ವರೂಪವನ್ನು ಬದಲಿಸಿ ಅದನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕ್ ನೌಕರರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ಡಿಸೋಜಾ ಅವರು, ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನೀಕರಣ ಹಾಗೂ ವಿಮಾ ಕ್ಷೇತ್ರದಲ್ಲಿ ವಿದೇಶೀ ನೇರ ಹೂಡಿಕೆ ಹೆಚ್ಚಿಸುವ ಮೂಲಕ ದೇಶದ ಆರ್ಥಿಕ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ನಾಯಕ ಯೋಗೀಶ್ ಜಪ್ಪಿನಮೊಗರು ಅವರು ಮಹಾಮುಷ್ಕರದ ಉದ್ದೇಶ ಹಾಗೂ ಕೇಂದ್ರ ಸರ್ಕಾರದ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಿವರಿಸಿದರು.
ಸಭೆಯಲ್ಲಿ ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಜಿ. ಫಣೀಂದ್ರ, AITUC ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜ, ಬಿ.ಎಂ. ಮಾಧವ, DYFI ಜಿಲ್ಲಾ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಸೇರಿದಂತೆ ಹಲವರು ಮಾತನಾಡಿ ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ನೌಕರರ ಸಂಕಷ್ಟಗಳನ್ನು ವಿವರಿಸಿದರು.
ಪ್ರತಿಭಟನೆಯಲ್ಲಿ ವಿವಿಧ ಕಾರ್ಮಿಕ, ಬ್ಯಾಂಕ್, ವಿಮಾ, ಹೋಟೇಲ್, ದಲಿತ, ಆದಿವಾಸಿ, ಮಹಿಳಾ ಮತ್ತು ಯುವ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading