Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೀದರ್ ಜಿಲ್ಲೆಯಲ್ಲಿ ನೀರು-ಮೇವು ಕೊರತೆ ಮುನ್ನೆಚ್ಚರಿಕೆ: ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ ಜಿಲ್ಲೆಯಲ್ಲಿ ನೀರು-ಮೇವು ಕೊರತೆ ಮುನ್ನೆಚ್ಚರಿಕೆ: ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್: ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಹಾಗೂ ಸಮಗ್ರ ಕ್ರಿಯಾಯೋಜನೆ ರೂಪಿಸಿ ಒಂದು ವಾರದೊಳಗೆ ಸಲ್ಲಿಸುವಂತೆ ಸೂಚಿಸಿದರು.

“ಪ್ರತಿ ತಾಲೂಕಿನ ತಹಸೀಲ್ದಾರ್‌, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಸಕ್ರಿಯರಾಗಿ ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಬೇಕು,” ಎಂದು ಹೇಳಿದರು.

ಹವಾಮಾನ ಇಲಾಖೆ ವರದಿ ಪ್ರಕಾರ ಈ ವರ್ಷ ತಾಪಮಾನ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಕಳೆದ ಮೂರ್ನಾಲ್ಕು ವರ್ಷಗಳ ಅನುಭವದ ಆಧಾರದಲ್ಲಿ ಮುಂಚಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳು ತಮ್ಮ ಅನುದಾನವನ್ನು ಬಳಸಿಕೊಂಡು ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ತಿಳಿಸಿದರು.

ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆ ಆಗದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 15 ದಿನಕ್ಕೊಮ್ಮೆ ತಾಲೂಕು ಮಟ್ಟದ ಸಭೆಗಳನ್ನು ನಡೆಸಿ ಸಮಸ್ಯೆಗಳ ಪರಿಶೀಲನೆ ಹಾಗೂ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಬರ ಘೋಷಣೆಯಾದಲ್ಲಿ ತಾಲ್ಲೂಕು ಟಾಸ್ಕ್ ಫೋರ್ಸ್ ಅನುದಾನದಿಂದ ಕೊಳವೆಬಾವಿ ಪುನಶ್ಚೇತನ, ಪೈಪ್‌ಲೈನ್ ದುರಸ್ತಿ, ಮೋಟಾರ್ ರಿಪೇರಿ, ಖಾಸಗಿ ಕೊಳವೆಬಾವಿ ಬಾಡಿಗೆ, ಟ್ಯಾಂಕರ್ ಮೂಲಕ ನೀರು ಸರಬರಾಜು ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.

ಔರಾದ ತಾಲೂಕಿನಲ್ಲಿ ಕಳೆದ ಬಾರಿ 48 ಗ್ರಾಮಗಳು ಹಾಗೂ 29 ತಾಂಡಾಗಳಲ್ಲಿ ತೀವ್ರ ನೀರಿನ ಸಮಸ್ಯೆ ಕಂಡುಬಂದಿತ್ತು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಅದೇ ರೀತಿ ಕಮಲ್‌ ನಗರ್ ತಾಲೂಕಿನ ಚಿಕ್ಲಿ (ಯು) ಸುತ್ತಮುತ್ತಲಿನ 28 ತಾಂಡಾಗಳಲ್ಲೂ, ಬಾಲ್ಕಿ ತಾಲೂಕಿನ 15 ಗ್ರಾಮಗಳಲ್ಲೂ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪರ್ಯಾಯ ನೀರು ಮೂಲಗಳ ಬಳಕೆ

ಖಾಸಗಿ ಕೊಳವೆಬಾವಿಗಳನ್ನು ಈಗಾಗಲೇ ಗುರುತಿಸಿ ಬಾಡಿಗೆಗೆ ಪಡೆಯಲು ಕ್ರಮ ಕೈಗೊಳ್ಳಬೇಕು. ತೆರೆದ ಬಾವಿಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ ಕೆರೆಗಳನ್ನು ಸಹ ಕುಡಿಯುವ ನೀರಿಗಾಗಿ ಬಳಸುವ ಬಗ್ಗೆ ಪರಿಗಣಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಜಿಲ್ಲೆಯಲ್ಲಿ ಮೇವು ದಾಸ್ತಾನು ಮತ್ತು ಆದ್ಯತೆಗಳ ಪರಿಶೀಲನೆ ಮಾಡಬೇಕು. ಜಿಲ್ಲೆಯ ಹೊರಗೆ ಮೇವು ಸಾಗಾಟವಾಗದಂತೆ ತಹಸೀಲ್ದಾರರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ವಿವಿಧ ತಾಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ನಿಮ್ಮ ಊರು, ನಗರ, ಪಟ್ಟಣದ ಕುಂದು-ಕೊರತೆಗಳ ಬಗ್ಗೆ ಫೋಟೋ, ವಿಡಿಯೋ ಮಾಹಿತಿಯನ್ನು prajapranews@gmail.com ಗೆ ಅಥವಾ ಪ್ರಜಾಪರ ನ್ಯೂಸ್ ವಾಟ್ಸಪ್ ಸಂಖ್ಯೆ 93809 29526, 9606232054 ಗೆ ಕಳುಹಿಸಬಹುದು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ವರದಿ: ಅರವಿಂದ ಮಲ್ಲಿಗೆ, ಬೀದರ್ ಜಿಲ್ಲೆ

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading