Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮೆಸ್ಕಾಂ ಅವ್ಯವಸ್ಥೆ ವಿರುದ್ಧ ಗುತ್ತಿಗೆದಾರರು–ಜನಪರ ಸಂಘಟನೆಗಳ ಆಕ್ರೋಶ; ಸಮಸ್ಯೆ ಇತ್ಯರ್ಥಗೊಳ್ಳದಿದ್ದರೆ ‘ಕಚೇರಿ ಚಲೋ’ ಎಚ್ಚರಿಕೆ

ಮೆಸ್ಕಾಂ ಅವ್ಯವಸ್ಥೆ ವಿರುದ್ಧ ಗುತ್ತಿಗೆದಾರರು–ಜನಪರ ಸಂಘಟನೆಗಳ ಆಕ್ರೋಶ; ಸಮಸ್ಯೆ ಇತ್ಯರ್ಥಗೊಳ್ಳದಿದ್ದರೆ ‘ಕಚೇರಿ ಚಲೋ’ ಎಚ್ಚರಿಕೆ

ಮಂಗಳೂರು, ಏಪ್ರಿಲ್ 29: ಮೆಸ್ಕಾಂನ ಸರ್ವರ್ ಹಾಗೂ N-SOFT ವ್ಯವಸ್ಥೆಯ ತೀವ್ರ ತಾಂತ್ರಿಕ ಸಮಸ್ಯೆಗಳ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸಾವಿರಾರು ಗ್ರಾಹಕರು ಮತ್ತು ವಿದ್ಯುತ್ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿರುವುದಾಗಿ ಜನಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಹೊಸದಾಗಿ ನಿರ್ಮಾಣಗೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡುವ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿರುವುದರಿಂದ ಜನರು ಗೃಹಪ್ರವೇಶ ಮಾಡಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ದ.ಕ. ಜಿಲ್ಲಾ ಸಮಿತಿ, CITU, DYFI ಹಾಗೂ ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳು ಸಂಯುಕ್ತವಾಗಿ ಪತ್ರಿಕಾಗೋಷ್ಠಿ ನಡೆಸಿ ಮೆಸ್ಕಾಂ ಹಾಗೂ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿವೆ. ಜಿಲ್ಲೆಯ ಜನತೆ ತಮ್ಮ ಜೀವನದ ಉಳಿತಾಯವನ್ನು ಬಳಸಿಕೊಂಡು ಮನೆಗಳನ್ನು ನಿರ್ಮಿಸಿದರೂ, ವಿದ್ಯುತ್ ಸಂಪರ್ಕದ ಕೊರತೆಯಿಂದಾಗಿ ಆ ಮನೆಗಳಲ್ಲಿ ವಾಸಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ವಿದ್ಯುತ್ ಜೋಡಣೆ ಕಾರ್ಯವನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರು ತಮ್ಮ ಹಣವನ್ನು ಮುಂಚಿತವಾಗಿ ಹೂಡಿಕೆ ಮಾಡಿ ಕೆಲಸ ಮಾಡಿದ್ದರೂ, ಸಂಪರ್ಕ ವಿಳಂಬದಿಂದ ಗ್ರಾಹಕರು ಹಣವನ್ನು ತಡೆಹಿಡಿದಿರುವುದರಿಂದ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಕ್ಷಾಂತರ ರೂಪಾಯಿ ಬಾಕಿ ಉಳಿದಿರುವುದರಿಂದ ನೂರಾರು ಗುತ್ತಿಗೆದಾರರ ಬದುಕು ಸಂಕಟಕ್ಕೀಡಾಗಿದೆ ಎಂದು ಸಂಘಟನೆಗಳು ತಿಳಿಸಿವೆ. ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಈ ಪರಿಸ್ಥಿತಿಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಹಲವು ಬಾರಿ ಮೆಸ್ಕಾಂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ. ಮುಂದಿನ ಒಂದು ವಾರದೊಳಗೆ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸದಿದ್ದಲ್ಲಿ, ಜಿಲ್ಲೆಯ ಗುತ್ತಿಗೆದಾರರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ವಿವಿಧ ಜನಪರ ಸಂಘಟನೆಗಳು ಸೇರಿ ಮೆಸ್ಕಾಂ ಕಚೇರಿಗೆ ‘ಚಲೋ’ ಹೋರಾಟವನ್ನು ಆಯೋಜಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಪತ್ರಿಕಾಗೋಷ್ಠಿಯಲ್ಲಿ CITU ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಅಧ್ಯಕ್ಷ ಕುಶಾಲ್ ಪೂಜಾರಿ, ರಾಜ್ಯ ನಿಕಟಪೂರ್ವ ಉಪಾಧ್ಯಕ್ಷ ಉರ್ಬನ್ ಪಿಂಟೋ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕೆ. ಯಾದವ ಶೆಟ್ಟಿ ಸೇರಿದಂತೆ ಹಲವರು ಮಾತನಾಡಿದರು. ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ಸಂಘಟನಾ ಕಾರ್ಯದರ್ಶಿ ಯೂಸುಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading