Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಎಚ್ಚರಿಕೆ

ಮಂಗಳೂರು, ಮೇ 14: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಆರೋಗ್ಯ ಇಲಾಖೆಯ ಕ್ರಮವನ್ನು ತೀವ್ರವಾಗಿ ಖಂಡಿಸಿ, Communist Party of India (Marxist) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಯಿತು.

ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಿನಿ ವಿಧಾನಸೌಧದವರೆಗೆ ಸಾಗಿದ್ದು, ನೂರಾರು ಕಾರ್ಯಕರ್ತರು ಭಾಗವಹಿಸಿದರು. ಮೆರವಣಿಗೆಯ ವೇಳೆ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ Dinesh Gundu Rao ವಿರುದ್ಧ ಘೋಷಣೆಗಳು ಮೊಳಗಿದವು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, “ದಕ್ಷಿಣ ಕನ್ನಡ ಜಿಲ್ಲೆ ಈಗಾಗಲೇ ಖಾಸಗಿ ಮೆಡಿಕಲ್ ಕಾಲೇಜುಗಳು ಹಾಗೂ ಕಾರ್ಪೊರೇಟ್ ಆಸ್ಪತ್ರೆಗಳ ಪ್ರಭಾವಕ್ಕೆ ಸಿಲುಕಿದೆ. ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸೆಯಿಂದ ಸಾಮಾನ್ಯ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಚಿಕಿತ್ಸೆಗೆ ದೇಣಿಗೆ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ,” ಎಂದು ಆರೋಪಿಸಿದರು.

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸುವುದು ಬಡಜನರ ಆರೋಗ್ಯ ಹಕ್ಕಿನ ಮೇಲಿನ ನೇರ ದಾಳಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. “ಇದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುವ ಕ್ರಮವಾಗಿದ್ದು, ಬಡ ರೋಗಿಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳ ತರಬೇತಿ ಸಾಧನಗಳಾಗಿ ಬಳಸುವ ಅಪಾಯವಿದೆ,” ಎಂದರು.

ಸರಕಾರ ಈ ಆದೇಶವನ್ನು ಹಿಂಪಡೆಯದಿದ್ದಲ್ಲಿ ಜಿಲ್ಲೆಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು. ಅಗತ್ಯವಿದ್ದರೆ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಆರೋಗ್ಯ ಕ್ಷೇತ್ರದ ಖಾಸಗೀಕರಣವನ್ನು ಯಾವುದೇ ಕಾರಣಕ್ಕೂ ಒಪ್ಪಲಾಗುವುದಿಲ್ಲ. ಈ ವಿಚಾರದಲ್ಲಿ ಬಿಜೆಪಿ ಮೌನ ವಹಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿವೆ ಎಂಬ ಸಂದೇಶ ಜನರಲ್ಲಿ ಮೂಡುತ್ತಿದೆ,” ಎಂದು ಟೀಕಿಸಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಯಾದವ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ಡಾ. ಕೃಷ್ಣಪ್ಪ ಕೊಂಚಾಡಿ, ಬಿ.ಎಂ. ಭಟ್, ವಸಂತ ಆಚಾರಿ, ಜಯಂತಿ ಶೆಟ್ಟಿ ಹಾಗೂ ಸುಕುಮಾರ್ ತೊಕ್ಕೊಟ್ಟು ಉಪಸ್ಥಿತರಿದ್ದರು. ಜಿಲ್ಲಾ ಸಮಿತಿ ಸದಸ್ಯ ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading