ಚಿಕ್ಕಮಗಳೂರು: ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ಮೀಸಲಾತಿಯ ಜನಕರೆಂದೇ ಖ್ಯಾತರಾದ ಛತ್ರಪತಿ ಶಾಹು ಮಹಾರಾಜರ ಜನ್ಮದಿನವನ್ನು ಜಿಲ್ಲಾಕಚೇರಿಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಹು ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಹೋರಾಟದ ಮಹತ್ವವನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಜಾಕಿರ್ ಹುಸೇನ್ ಅವರು, 1902ರ ಜುಲೈ 26ರಂದು ಛತ್ರಪತಿ ಶಾಹು ಮಹಾರಾಜರು ತಮ್ಮ ಸಂಸ್ಥಾನದಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸುವ ಮೂಲಕ ಭಾರತದ ಮೀಸಲಾತಿ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದರು ಎಂದು ಹೇಳಿದರು. 1920ರಲ್ಲಿ ನಡೆದ ಮಹಾಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ರಾಷ್ಟ್ರಮಟ್ಟದ ನಾಯಕರೆಂದು ಪರಿಚಯಿಸಿ, ತಮ್ಮ ಮತ್ತು ಮಹಾತ್ಮ ಜ್ಯೋತಿಬಾ ಫುಲೆ ಆರಂಭಿಸಿದ ಸಾಮಾಜಿಕ ಚಳವಳಿಯನ್ನು ಮುಂದುವರಿಸುವ ಹೊಣೆಗಾರಿಕೆಯನ್ನು ಅಂಬೇಡ್ಕರ್ ವಹಿಸಲಿದ್ದಾರೆ ಎಂದು ಶಾಹು ಮಹಾರಾಜರು ಘೋಷಿಸಿದ್ದನ್ನು ಅವರು ಸ್ಮರಿಸಿದರು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಮಾತನಾಡಿ, ಶಾಹು ಮಹಾರಾಜರು ಕೈಗೊಂಡ ಮೀಸಲಾತಿಯ ನಿರ್ಧಾರವು ಮುಂದೆ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮೀಸಲಾತಿ ನೀತಿಗಳ ಮೇಲೂ ಪ್ರಭಾವ ಬೀರಿತು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂಲಕ ಭಾರತೀಯ ಸಂವಿಧಾನದಲ್ಲಿ ಮೀಸಲಾತಿ ತತ್ವ ಅಳವಡಿಕೆಯಾಗುವ ಮೂಲಕ ದೇಶಾದ್ಯಂತ ಸಾಮಾಜಿಕ ನ್ಯಾಯಕ್ಕೆ ಬುನಾದಿ ಹಾಕಲಾಯಿತು ಎಂದು ತಿಳಿಸಿದರು.
ರಾಜ್ಯ ಕಾರ್ಯದರ್ಶಿ ಕೆ.ಬಿ. ಸುಧಾ ಅವರು ಮಾತನಾಡಿ, ಶಾಹು ಮಹಾರಾಜರು ಸಾಮಾಜಿಕ ತಾರತಮ್ಯ ಮತ್ತು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಧೀಮಂತ ನಾಯಕರು ಎಂದು ಬಣ್ಣಿಸಿದರು. ತಮ್ಮ ಜೀವನದಲ್ಲಿ ಅನುಭವಿಸಿದ ಅವಮಾನಗಳನ್ನು ಸವಾಲಾಗಿ ಸ್ವೀಕರಿಸಿ, ಹಿಂದುಳಿದ ವರ್ಗಗಳ ಏಳಿಗೆಗಾಗಿ ಮೀಸಲಾತಿ ಜಾರಿಗೊಳಿಸಿದರು. ಅಲ್ಲದೆ, ಸತಿ ಸಹಗಮನ ಪದ್ಧತಿಯನ್ನು ವಿರೋಧಿಸಿ, ವಿಧವಾ ವಿವಾಹಕ್ಕೆ ಉತ್ತೇಜನ ನೀಡುವಂತಹ ಹಲವು ಸಮಾಜಮುಖಿ ಸುಧಾರಣೆಗಳನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.
ರಾಜ್ಯ ಕಾರ್ಯದರ್ಶಿ ಪಿ. ವೇಲಾಯುದನ್ ಅವರು ಮಾತನಾಡಿ, ಮಹಾರಾಷ್ಟ್ರದ ಒಂದು ಸಂಸ್ಥಾನದಲ್ಲಿ ಆರಂಭವಾದ ಮೀಸಲಾತಿ ಚಳವಳಿಯು ಇಂದು ಭಾರತದ ಸಂವಿಧಾನದ ಮೂಲಕ ದೇಶಾದ್ಯಂತ ಜಾರಿಯಲ್ಲಿದೆ. ಇತರೆ ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು ಮೀಸಲಾತಿ ಜಾರಿಯಲ್ಲಿದ್ದರೂ, ಸರ್ಕಾರಗಳು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಪಿ. ಪರಮೇಶ್ವರ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹುಜನ ಸಮಾಜ ಪಕ್ಷವು ಸಾಮಾಜಿಕ ಪರಿವರ್ತನೆಯ ನಾಯಕರ ತ್ಯಾಗ, ಹೋರಾಟ ಮತ್ತು ಅವರ ಚಿಂತನೆಗಳನ್ನು ಯುವಜನತೆಗೆ ಪರಿಚಯಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ. ಛತ್ರಪತಿ ಶಾಹು ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಾನ್ಯಾವರ್ ಕಾನ್ಷಿರಾಂ ಅವರ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳನ್ನು ಒಗ್ಗೂಡಿಸಿ ಸಾಮಾಜಿಕ ನ್ಯಾಯದ ಪರ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಜಾಕಿರ್ ಅಲಿಖಾನ್, ಲೋಕಸಭಾ ಉಸ್ತುವಾರಿ ಬಿ.ಎಂ. ಶಂಕರ್, ಜಿಲ್ಲಾ ಸಂಯೋಜಕ ಕೆ.ಆರ್. ಗಂಗಾಧರ್, ಜಿಲ್ಲಾ ಉಪಾಧ್ಯಕ್ಷರಾದ ಎಂ. ಬಾಬು ಮತ್ತು ಕೆ.ಎಸ್. ಮಂಜುಳಾ, ಜಿಲ್ಲಾ ಕಾರ್ಯದರ್ಶಿ ಪುಟ್ಟಸ್ವಾಮಿ, ಕಡೂರು ತಾಲೂಕು ಅಧ್ಯಕ್ಷ ಚಂದ್ರಶೇಖರ್, ಮೂಡಿಗೆರೆ ತಾಲೂಕು ಪ್ರಧಾನ ಕಾರ್ಯದರ್ಶಿ ಮಹೇಶ್, ಚಿಕ್ಕಮಗಳೂರು ತಾಲೂಕು ಪ್ರಧಾನ ಕಾರ್ಯದರ್ಶಿ ವಸಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರ್ವಹಣೆಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಂಜುನಾಥ್ ವಹಿಸಿದ್ದು, ಕೆ.ಎಸ್. ಮಂಜುಳಾ ಸ್ವಾಗತಿಸಿದರು. ಪುಟ್ಟಸ್ವಾಮಿ ಭಕ್ತರಹಳ್ಳಿ ವಂದನಾರ್ಪಣೆ ಸಲ್ಲಿಸಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.