ಮಂಗಳೂರು, ಜುಲೈ 26: ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಪೇಜಾವರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಛತ್ರಪತಿ ಶಾಹು ಮಹಾರಾಜ್ ಜಯಂತಿ ಹಾಗೂ ಮೀಸಲಾತಿ ಜಾರಿ ದಿನವನ್ನು ಶನಿವಾರ ಆಚರಿಸಲಾಯಿತು. ಕಾರ್ಯಕ್ರಮವನ್ನು ಬಿಎಸ್ಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಉದ್ಘಾಟಿಸಿ ಮಾತನಾಡಿದರು. ಛತ್ರಪತಿ ಶಾಹು ಮಹಾರಾಜರು 1902ರ ಜುಲೈ 26ರಂದು ಕೊಲ್ಲಾಪುರ ಸಂಸ್ಥಾನದಲ್ಲಿ ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯವನ್ನು ಆರಂಭಿಸಿದ್ದರು ಎಂದು ಅವರು ತಿಳಿಸಿದರು.
ಶಾಹು ಮಹಾರಾಜರು ಶಿಕ್ಷಣ ಕ್ಷೇತ್ರ, ಸಾಮಾಜಿಕ ಸುಧಾರಣೆ ಮತ್ತು ಕೃಷಿ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಮಹಾತ್ಮ ಜ್ಯೋತಿರಾವ್ ಫುಲೆ ಅವರ ಸತ್ಯಶೋಧಕ ಸಮಾಜದ ಚಿಂತನೆಗಳನ್ನು ತಮ್ಮ ಸಂಸ್ಥಾನದಲ್ಲಿಯೂ ಅನುಷ್ಠಾನಗೊಳಿಸಿ ಸಾಮಾಜಿಕ ಪರಿವರ್ತನೆಯ ಚಳುವಳಿಗೆ ಚಾಲನೆ ನೀಡಿದ ಮಹಾಪುರುಷರಾಗಿದ್ದಾರೆ ಎಂದು ಹೇಳಿದರು. ಅವರು ವಿವಿಧ ದೇಶಗಳು ಹಾಗೂ ಪ್ರಾಂತ್ಯಗಳಿಗೆ ಭೇಟಿ ನೀಡಿ ಅಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆ, ಜನರ ಶಿಸ್ತು, ಅಭಿವೃದ್ಧಿ ಕಾರ್ಯಗಳು, ಸುಂದರ ಕಟ್ಟಡಗಳು, ರಸ್ತೆಗಳು ಹಾಗೂ ಅಣೆಕಟ್ಟುಗಳನ್ನು ಅಧ್ಯಯನ ಮಾಡಿ, ತಮ್ಮ ಸಂಸ್ಥಾನದಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಸಾಮಾಜಿಕ ಪ್ರಜಾಪ್ರಭುತ್ವವನ್ನು ಜನಜೀವನದಲ್ಲಿ ಜಾರಿಗೊಳಿಸಿದ ಕ್ರಾಂತಿಕಾರಿ ರಾಜರಾಗಿ ಛತ್ರಪತಿ ಶಾಹು ಮಹಾರಾಜರು ಗುರುತಿಸಿಕೊಂಡಿದ್ದಾರೆ ಎಂದು ಕಾಂತಪ್ಪ ಅಲಂಗಾರ್ ಅಭಿಪ್ರಾಯಪಟ್ಟರು.
ಬಹುಜನ ಸಮಾಜದ ಮುಖಂಡ ಎಸ್.ಆರ್. ಲಕ್ಷ್ಮಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಹುಜನ ಚಳುವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬಹುಜನ ಸಮಾಜದ ಎಲ್ಲರೂ ಒಗ್ಗಟ್ಟಿನಿಂದ ಚಳುವಳಿಯಲ್ಲಿ ಪಾಲ್ಗೊಂಡು ಅದರ ಉದ್ದೇಶಗಳನ್ನು ಸಾಕಾರಗೊಳಿಸಲು ಮುಂದಾಗಬೇಕಿದೆ ಎಂದು ಕರೆ ನೀಡಿದರು. ಬಹುಜನ ಸಮಾಜದ ಮಹಿಳಾ ಮುಖಂಡೆ ಶಶಿಕಲಾ ಮಾತನಾಡಿ, ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯ ಕಾರ್ಯಕ್ರಮಗಳು ಕಡಿಮೆಯಾಗುತ್ತಿವೆ. ಈ ಪವಿತ್ರ ಚಳುವಳಿಯನ್ನು ಎಲ್ಲರೂ ಸೇರಿ ಮತ್ತಷ್ಟು ಬಲಿಷ್ಠಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಎಸ್ಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಜಿಲ್ಲಾ ಅಧ್ಯಕ್ಷ ಸೋಮಪ್ಪ ಅಲಂಗಾರ್ ಮಾತನಾಡಿ, ಛತ್ರಪತಿ ಶಾಹು ಮಹಾರಾಜರು ಸಾಮಾಜಿಕ ಪ್ರಜಾಪ್ರಭುತ್ವದ ರೂವಾರಿಯಾಗಿದ್ದು, ಶಿಕ್ಷಣ, ಸಾಮಾಜಿಕ ಸುಧಾರಣೆ ಹಾಗೂ ಕೃಷಿ ಕ್ಷೇತ್ರಗಳಿಗೆ ನೀಡಿದ ಅವರ ಕೊಡುಗೆ ಇಂದಿಗೂ ಮಾದರಿಯಾಗಿದೆ ಎಂದು ಹೇಳಿದರು. ನಾವೆಲ್ಲರೂ ಅಂಬೇಡ್ಕರ್ವಾದವನ್ನು ಮೈಗೂಡಿಸಿಕೊಳ್ಳಬೇಕೇ ಹೊರತು ಮನುವಾದವನ್ನು ಅನುಸರಿಸಬಾರದು. ಮುಂದಿನ ಆಗಸ್ಟ್ ತಿಂಗಳಲ್ಲಿ ಬಿಎಸ್ಪಿ ಕಾರ್ಯಕರ್ತರ ಶಿಬಿರವನ್ನು ಆಯೋಜಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಪರಿಪೂರ್ಣ ಜಿಲ್ಲಾ ಸಮಿತಿಯನ್ನು ರಚಿಸಲಾಗುವುದು ಎಂದು ಅವರು ಘೋಷಿಸಿದರು.