ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ! ಕೇವಲ ಕೆಲವೇ ದಿನಗಳ ಅಂತರದಲ್ಲಿ ಜಿಲ್ಲೆಯಲ್ಲೇ ಎರಡು ಗುಂಡಿನ ಹತ್ಯೆಗಳು ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಉಡುಪಿಯ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿ ಗ್ರಾಮದಲ್ಲಿ, ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಶುಕ್ರವಾರ, ಆಗಸ್ಟ್ 7ರಂದು ಈ ಘಟನೆ ನಡೆದಿದೆ. ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾಗಿದ್ದ ಡೇವಿಡ್ ಡಿಸೋಜಾ ಅವರ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸಮೀಪದಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಡಿಸೋಜಾ ಮೃತಪಟ್ಟಿದ್ದಾರೆ. ದಾಳಿ ನಡೆಸಿದ ಬಳಿಕ ಆರೋಪಿಗಳು ಸ್ಥಳದಿಂದ ತಕ್ಷಣ ಪರಾರಿಯಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಡೇವಿಡ್ ಡಿಸೋಜಾ ಅವರ ಹತ್ಯೆಗೆ ಹಿಂದಿನ ಹಣಕಾಸಿನ ವಿವಾದವೇ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ಹತ್ಯೆಯ ಹಿಂದಿರುವ ನಿಖರ ಕಾರಣವೇನು? ದಾಳಿ ನಡೆಸಿದವರು ಯಾರು? ಎಂಬ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಪೊಲೀಸರು ಇದೀಗ ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳು, ವಿಧಿವಿಜ್ಞಾನ ಸಾಕ್ಷ್ಯಗಳು ಹಾಗೂ ಇತರೆ ವೈಜ್ಞಾನಿಕ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನು ಡೇವಿಡ್ ಡಿಸೋಜಾ ವಿರುದ್ಧ ಈ ಹಿಂದೆ 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಇದರಲ್ಲಿ 2020ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವೂ ಸೇರಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ನಡೆದ ಮತ್ತೊಂದು ಗುಂಡಿನ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ.
ಕೆಲವೇ ದಿನಗಳ ಹಿಂದೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಉದ್ಯಮಿ ಇವಾನ್ ರಿಚರ್ಡ್ ಮಸ್ಕರೇನ್ಹಾಸ್ ಅವರನ್ನು ಕೂಡ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆ ಪ್ರಕರಣದಲ್ಲೂ ಹಣಕಾಸಿನ ವಿವಾದವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇದೀಗ ಒಂದೇ ವಾರದೊಳಗೆ ಉಡುಪಿ ಜಿಲ್ಲೆಯಲ್ಲಿ ಎರಡು ಗುಂಡಿನ ಹತ್ಯೆಗಳು ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ಎರಡೂ ಹತ್ಯೆಗಳ ನಡುವೆ ಯಾವುದಾದರೂ ಸಾಮ್ಯತೆ ಇದೆಯಾ?
ಎರಡೂ ಪ್ರಕರಣಗಳ ಹಿಂದೆ ಹಣಕಾಸಿನ ವಿವಾದವೇ ಕಾರಣವಾಗಿದೆಯಾ? ಅಥವಾ ಇದು ಕೇವಲ ಕಾಕತಾಳೀಯವೇ? ಸದ್ಯಕ್ಕೆ ಎರಡೂ ಪ್ರಕರಣಗಳ ನಡುವೆ ಯಾವುದೇ ಸಂಪರ್ಕವಿದೆ ಎಂಬುದನ್ನು ಪೊಲೀಸರು ದೃಢಪಡಿಸಿಲ್ಲ. ಆದರೂ, ಎರಡೂ ಪ್ರಕರಣಗಳಲ್ಲಿರುವ ಸಾಮ್ಯತೆಗಳ ಬಗ್ಗೆ ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳು, ಮೊಬೈಲ್ ಹಾಗೂ ಇತರೆ ವೈಜ್ಞಾನಿಕ ಸಾಕ್ಷ್ಯಗಳ ಆಧಾರದ ಮೇಲೆ ಹಂತಕರ ಜಾಡು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಂದೇ ವಾರದೊಳಗೆ ನಡೆದ ಈ ಎರಡು ಗುಂಡಿನ ಹತ್ಯೆಗಳು ಇದೀಗ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿವೆ. ಡೇವಿಡ್ ಡಿಸೋಜಾ ಹತ್ಯೆಯ ಹಿಂದೆ ಯಾರಿದ್ದಾರೆ? ಹಣಕಾಸಿನ ವಿವಾದವೇ ಕೊಲೆಗೆ ಕಾರಣವೇ? ಅಥವಾ ಇದರ ಹಿಂದೆ ಮತ್ತೇನಾದರೂ ರಹಸ್ಯವಿದೆಯಾ? ತನಿಖೆ ಮುಂದುವರಿದಂತೆ ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.