ಸುಳ್ಯ: ತಾಲ್ಲೂಕಿನ ಬಾಳುಗೋಡು ಗ್ರಾಮದ ಪುಣೇರಿ ಪ್ರದೇಶದಲ್ಲಿರುವ ಪರಿಶಿಷ್ಟ ಜಾತಿ ಸಮುದಾಯದ (ಎಸ್ಸಿ ಕಾಲೋನಿ) ನಿವಾಸಿಗಳು ಎದುರಿಸುತ್ತಿರುವ ತೀವ್ರ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಇಂದು ಸುಳ್ಯ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಮನವಿಯಲ್ಲಿ, ಮೂಲ ಸೌಕರ್ಯಗಳಲ್ಲಿ ಅತ್ಯಂತ ಅಗತ್ಯವಾಗಿರುವ ಶುದ್ಧ ಕುಡಿಯುವ ನೀರಿನ ಕೊರತೆಯನ್ನು ನಿವಾರಿಸುವ ಸಲುವಾಗಿ ಗಂಗಾ ಕಲ್ಯಾಣ ಇಲಾಖೆಯ ಮೂಲಕ ಕೊಳವೆಬಾವಿ ಕೊರೆಸಿ ಒದಗಿಸಬೇಕು ಎಂದು ಆಗ್ರಹಿಸಲಾಯಿತು. ಎಸ್ಸಿ ಕಾಲೋನಿಯ ನಿವಾಸಿಗಳು ದಿನನಿತ್ಯದ ಜೀವನಕ್ಕೆ ಬೇಕಾದ ನೀರಿಗಾಗಿ ಬಹಳಷ್ಟು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ AVSS ಸುಳ್ಯ ಶಾಖೆಯ ನಿರ್ವಹಣಾ ಸಮಿತಿಯ ಸದಸ್ಯರಾದ ಚಂದ್ರಶೇಖರ ಕೆ. ಪಲ್ಲತ್ತಡ್ಕ, ಚೋಮ ಗಾಂಧಿನಗ ಹಾಗೂ ಹರೀಶ್ ಮೇನಾಲ ಉಪಸ್ಥಿತರಿದ್ದು, ಕಾಲೋನಿಯ ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು. ಸಂಬಂಧಿಸಿದ ಅಧಿಕಾರಿಗಳು ವಿಷಯವನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.