ಬೀದರ್ ಡಿ21 : ಚುನಾವಣೆ ವೇಳೆ ದಲಿತರ ಮತ ಪಡೆಯುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿ, ನಂತರ ಒಂದಲ್ಲೊಂದು ಗೊಂದಲ ಉಂಟುಮಾಡುವ ಮೂಲಕ ದಲಿತ ಜಾತಿಗಳ ನಡುವೆ ಸಂಘರ್ಷಕ್ಕೆ ವೇದಿಕೆ ಸಿದ್ಧಪಡಿಸಿದೆ. ಇದರಿಂದ ದಲಿತರಿಗೆ ಮಹಾ ಮೋಸವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.
ರವಿವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1950ರಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಕೇವಲ 6 ಜಾತಿಗಳು ಮತ್ತು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ 3 ಜಾತಿಗಳನ್ನು ಮಾತ್ರ ಸೇರಿಸಲಾಗಿತ್ತು. ಆದರೆ ಇದೀಗ ಎಸ್ಸಿ ಪಟ್ಟಿಯಲ್ಲಿ 101 ಹಾಗೂ ಎಸ್ಟಿ ಪಟ್ಟಿಯಲ್ಲಿ 56 ಜಾತಿಗಳು ಸೇರಿವೆ ಎಂದು ಮಾಹಿತಿ ನೀಡಿದರು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಹರಿಯಾಣ, ತೆಲಂಗಾಣ, ಪಂಜಾಬ್, ತಮಿಳುನಾಡು ಹಾಗೂ ಆಂಧ್ರ ಪ್ರದೇಶ ರಾಜ್ಯಗಳು ಒಳ ಮೀಸಲಾತಿ ಜಾರಿಗೊಳಿಸಿದ್ದರೂ, ಕರ್ನಾಟಕ ಸರ್ಕಾರ ಇದನ್ನು ಸಮರ್ಪಕವಾಗಿ ಜಾರಿ ಮಾಡುತ್ತಿಲ್ಲ ಎಂದು ಟೀಕಿಸಿದರು.
ಆಗಸ್ಟ್ 25ರಂದು ಕ್ಯಾಬಿನೆಟ್ನಲ್ಲಿ ಒಳ ಮೀಸಲಾತಿ ಜಾರಿಗೊಳಿಸಿದರೂ ಸ್ಪಷ್ಟತೆ ಇಲ್ಲದೆ ಗೊಂದಲ ಸೃಷ್ಟಿಸಲಾಗಿದೆ. ಎ.ಕೆ ಮತ್ತು ಎ.ಡಿ ಸಮುದಾಯಗಳ ಮೀಸಲಾತಿ ಪ್ರಮಾಣ ಶೇ.1ರಷ್ಟಿದ್ದುದನ್ನು ಕಡಿಮೆ ಮಾಡಿ ಅವರಿಗೆ ಅನ್ಯಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 59 ಪಂಗಡಗಳು ನ್ಯಾಯಾಲಯದ ಮೊರೆ ಹೋಗಿವೆ. ಪರಸ್ಪರ ಕಾನೂನು ಹೋರಾಟ ನಡೆಯುವುದರಿಂದ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕಾರಜೋಳ ಆರೋಪಿಸಿದರು.
ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ ಅವರ ಸೂಚನೆಯಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆದುಕೊಳ್ಳುತ್ತಿದ್ದಾರೆ. ಡಿಸೆಂಬರ್ 18ರಂದು ಬೆಳಗಾವಿ ಅಧಿವೇಶನದಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಪ್ರತ್ಯೇಕ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಿರುವುದು ದುರಂತ ಎಂದು ಅವರು ಹೇಳಿದರು. ಈ ಮಸೂದಿಯಲ್ಲಿ ನೇರ ನೇಮಕಾತಿ ಮತ್ತು ಪದೋನ್ನತಿಯಲ್ಲಿ ಒಳ ಮೀಸಲಾತಿ ಕಲ್ಪಿಸದೆ ಸಂವಿಧಾನದ ಆಶಯವನ್ನೇ ನಿರ್ಲಕ್ಷ್ಯ ಮಾಡಲಾಗಿದೆ ಎಂದು ದೂರಿದರು.
ಇದಲ್ಲದೆ, ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸದೆ ನಾಗಮೋಹನದಾಸ್ ಆಯೋಗವನ್ನು ರಚಿಸಲಾಗಿದೆ. ನಾಗಮೋಹನದಾಸ್ ವರದಿ ಅಥವಾ ನಮ್ಮ ಸರ್ಕಾರದ ಅವಧಿಯಲ್ಲಿ ರಚಿಸಲಾದ ಮಾಧುಸ್ವಾಮಿ ವರದಿಯಾದರೂ ಜಾರಿಗೊಳಿಸಬೇಕು. ಉಳಿದ ಯಾವುದೇ ವರದಿಗಳಿಗೆ ನಾವು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಈ ಸರ್ಕಾರಕ್ಕೆ ದಲಿತರ ಬಗ್ಗೆ ನಿಜವಾದ ಕಾಳಜಿ ಇಲ್ಲ. ದಲಿತರ ಮತ ಬೇಕು, ಆದರೆ ಅವರ ಅಭಿವೃದ್ಧಿ ಬೇಡ ಎನ್ನುವ ಮನೋಭಾವ ಕಾಂಗ್ರೆಸ್ಗಿದೆ ಎಂದು ಕಿಡಿಕಾರಿದರು. ದಲಿತ ಮುಖ್ಯಮಂತ್ರಿ ವಿಚಾರ ಬಂದಾಗಲೇ ಒಳಜಗಳ ಉಂಟಾಗುತ್ತದೆ. ಇಂತಹ ಸರ್ಕಾರಕ್ಕೆ 2028ರ ವಿಧಾನಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್, ಜಿಲ್ಲಾಧ್ಯಕ್ಷ ವಿಜಯಕುಮಾರ್ ಹಿಪ್ಪಳಗಾಂವ್, ಜಿಲ್ಲಾ ಉಪಾಧ್ಯಕ್ಷ ಕಮಲಾಕರ್ ಹೆಗಡೆ, ಶಿವಣ್ಣ ಹಿಪ್ಪಳಗಾಂವ್, ಹರೀಶ್ ಗಾಯಕವಾಡ್, ದೇವದಾಸ್ ಹಿಪ್ಪಳಗಾಂವ್, ಸನ್ನಿ ವಕೀಲಸಾಬ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
😀0😍0😢0😡0👍1👎0