ಸುಳ್ಯ: ತಾಲೂಕಿನ ಬಾಳುಗೋಡು ಗ್ರಾಮದ ಬೆಟ್ಟು ಮಕ್ಕಿ ಪ್ರದೇಶದಲ್ಲಿರುವ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳಿಗೆ ಭೂಮಿ ಮಂಜೂರಾತಿ ನೀಡಬೇಕೆಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯರಿಗೆ ಮನವಿ ಸಲ್ಲಿಸಲಾಯಿತು.
ಬಾಳುಗೋಡು ಗ್ರಾಮದ ಸರ್ವೇ ನಂ. 22/1 ರಲ್ಲಿ ಸುಮಾರು 9.90 ಸೆಂಟ್ಸ್ ಸರ್ಕಾರಿ ಭೂಮಿ ಇದ್ದು, ಈ ಭೂಮಿಯಲ್ಲಿ ಕಳೆದ 60 ವರ್ಷಗಳಿಗೂ ಹೆಚ್ಚು ಕಾಲ ಪರಿಶಿಷ್ಟ ಜಾತಿ ಸಮುದಾಯದ 28 ಕುಟುಂಬಗಳು ವಾಸಿಸುತ್ತಿವೆ. ಆದರೆ ಇದುವರೆಗೂ ಅವರಿಗೆ ಪಹಣಿ ಪತ್ರ ಸೇರಿದಂತೆ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗಿಲ್ಲ. ಇದರ ಪರಿಣಾಮವಾಗಿ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಈ ಕುಟುಂಬಗಳಿಗೆ ದೊರಕದಂತಾಗಿದೆ.
ಪರಿಶಿಷ್ಟ ಜಾತಿ ಸಮುದಾಯದ ಸಮಗ್ರ ಅಭಿವೃದ್ಧಿ ಹಾಗೂ ಹಿತದೃಷ್ಟಿಯಿಂದ, ವಾಸಿಸುತ್ತಿರುವ ಕುಟುಂಬಗಳಿಗೆ ಶೀಘ್ರವಾಗಿ ಭೂಮಿ ಮಂಜೂರಾತಿ ಮಾಡಿಕೊಡಬೇಕೆಂದು ಸಮಿತಿಯವರು ಶಾಸಕರಿಗೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಶಾಸಕರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಸ್ಥಳಕ್ಕೆ ಕರೆಸಿ ಅಗತ್ಯ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಿ, ಸಮುದಾಯದ ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸುವ ಭರವಸೆ ನೀಡಿದರು. ಅಲ್ಲದೆ ಸಂಬಂಧಿಸಿದ ಅಧಿಕಾರಿಗಳು ಎಲ್ಲಾ ದಾಖಲೆಗಳನ್ನು ಶೀಘ್ರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಸಮುದಾಯದವರಿಗೆ ಭೂಮಿ ಮಂಜೂರಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಆದೇಶಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕೆ. ಪಲ್ಲತ್ತಡ್ಕ, ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷ ಸತೀಶ್ ಬೂಡುಮಕ್ಕಿ, ಹಾಗೂ ಬಾಳುಗೋಡು ಗ್ರಾಮದ ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು.