ಬೆಳ್ತಂಗಡಿ: ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳದ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪತ್ತೆಯಾಗಿದ್ದ ಏಳು ಅಸ್ಥಿಪಂಜರಗಳ ಪೈಕಿ ಮೂವರ ಗುರುತನ್ನು ಡಿಎನ್ಎ ಪರೀಕ್ಷೆಯ ಮೂಲಕ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಅಧಿಕೃತವಾಗಿ ದೃಢಪಡಿಸಿದೆ. ವಿಶೇಷ ತನಿಖಾ ದಳ (ಎಸ್ಐಟಿ) ಸಲ್ಲಿಸಿರುವ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. 2025ರ ಸೆಪ್ಟೆಂಬರ್ 17 ಮತ್ತು 18ರಂದು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪದ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್ಐಟಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಏಳು ಅಸ್ಥಿಪಂಜರಗಳು ಹಾಗೂ ಕೆಲವು ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಗುರುತಿನ ಚೀಟಿಗಳ ಆಧಾರದ ಮೇಲೆ ಸಂಬಂಧಿತ ಕುಟುಂಬಗಳನ್ನು ಪತ್ತೆಹಚ್ಚಿ, ಅವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿನ ಎಫ್ಎಸ್ಎಲ್ಗೆ ಡಿಎನ್ಎ ಪರೀಕ್ಷೆಗಾಗಿ ಕಳುಹಿಸಲಾಗಿತ್ತು.
ಎಫ್ಎಸ್ಎಲ್ನ ಅಂತಿಮ ವರದಿಯ ಪ್ರಕಾರ, ಕೆಳಗಿನ ಮೂವರು ವ್ಯಕ್ತಿಗಳ ಅಸ್ಥಿಪಂಜರಗಳಿಗೆ ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳು ಹೊಂದಾಣಿಕೆಯಾಗಿವೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಯು. ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಆದಿಶೇಷ ನಾರಾಯಣ (27), ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾನಹಳ್ಳಿ ಗ್ರಾಮದ ಕೃಷ್ಣಪ್ಪ (85)
ಕಾಣೆಯಾಗಿದ್ದವರ ಹಿನ್ನೆಲೆ
ಯು. ಬಿ. ಅಯ್ಯಪ್ಪ ಅವರು 2017ರ ಜೂನ್ 25ರಂದು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದ ವೇಳೆ ಕಾಣೆಯಾಗಿದ್ದರು. ಈ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಆದಿಶೇಷ ನಾರಾಯಣ ಅವರು ಬೆಂಗಳೂರಿನಲ್ಲಿ ಬಾರ್ನಲ್ಲಿ ಕೆಲಸ ಮಾಡುತ್ತಿದ್ದರು. 2013ರ ಅಕ್ಟೋಬರ್ 2ರಂದು ಮನೆಗೆ ಬಂದಿದ್ದ ಅವರು ಮೊಬೈಲ್ ಫೋನ್ ಅನ್ನು ಮನೆಯಲ್ಲಿಯೇ ಬಿಟ್ಟು ಹೊರಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದರು. ಅವರು ಆಗಾಗ ಮನೆ ಬಿಟ್ಟು ಹೋಗುವ ಅಭ್ಯಾಸ ಹೊಂದಿದ್ದ ಕಾರಣ ಕುಟುಂಬದವರು ಆರಂಭದಲ್ಲಿ ದೂರು ದಾಖಲಿಸಿರಲಿಲ್ಲ.
ಕೃಷ್ಣಪ್ಪ ಅವರು 2024ರ ಅಕ್ಟೋಬರ್ 22ರಂದು ಮನೆಯಿಂದ ಹೊರಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಸ್ಐಟಿ ಈಗಾಗಲೇ ಡಿಎನ್ಎ ಪರೀಕ್ಷೆಯ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಂಡ ನಂತರ ಮೃತರ ಕುಟುಂಬ ಸದಸ್ಯರು ಅರ್ಜಿ ಸಲ್ಲಿಸಿ ಅಸ್ಥಿಪಂಜರಗಳನ್ನು ಪಡೆದುಕೊಳ್ಳಬಹುದಾಗಿದೆ. ಉಳಿದ ನಾಲ್ಕು ಅಸ್ಥಿಪಂಜರಗಳ ಗುರುತು ಪತ್ತೆಗಾಗಿ ತನಿಖೆ ಮತ್ತು ವೈಜ್ಞಾನಿಕ ಪರೀಕ್ಷೆಗಳು ಮುಂದುವರಿದಿವೆ. ಈ ಬೆಳವಣಿಗೆಯು ಧರ್ಮಸ್ಥಳ ಬಂಗ್ಲೆಗುಡ್ಡೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಮೈಲಿಗಲ್ಲಾಗಿದ್ದು, ಪ್ರಕರಣದ ಸತ್ಯಾಂಶವನ್ನು ಹೊರತರುವ ನಿಟ್ಟಿನಲ್ಲಿ ಎಸ್ಐಟಿ ತನಿಖೆಗೆ ಮತ್ತಷ್ಟು ಬಲ ನೀಡಿದೆ.