ಬೆಂಗಳೂರು, ಜೂನ್ 3: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಲೋಕಭವನ್ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಹೊಸ ನಾಯಕತ್ವ ಅಧಿಕೃತವಾಗಿ ಅಧಿಕಾರಕ್ಕೆ ಬಂದಿದೆ.

ಮುಖ್ಯಮಂತ್ರಿಯೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ಹಂತದಲ್ಲಿ ಒಟ್ಟು 13 ಮಂದಿ ಸಚಿವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದು, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನಕ್ಕೆ ಆದ್ಯತೆ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಮಾಣ ವಚನ ಸ್ವೀಕರಿಸಿದ ಸಚಿವರು
- ಜಿ. ಪರಮೇಶ್ವರ್ (ಉಪಮುಖ್ಯಮಂತ್ರಿ)
- ಯತೀಂದ್ರ ಸಿದ್ದರಾಮಯ್ಯ
- ಪ್ರಿಯಾಂಕ್ ಖರ್ಗೆ
- ಸತೀಶ್ ಜಾರಕಿಹೊಳಿ
- ಕೃಷ್ಣ ಬೈರೇಗೌಡ
- ಯು.ಟಿ. ಖಾದರ್
- ಕೆ.ಎಚ್. ಮುನಿಯಪ್ಪ
- ಎಂ.ಬಿ. ಪಾಟೀಲ್
- ಈಶ್ವರ ಖಂಡ್ರೆ
- ರಾಮಲಿಂಗಾ ರೆಡ್ಡಿ
- ಸಂತೋಷ್ ಲಾಡ್
- ಜಮೀರ್ ಅಹ್ಮದ್ ಖಾನ್
- ಡಾ. ಎಚ್.ಸಿ. ಮಹದೇವಪ್ಪ
ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಲವು ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ವಿವಿಧ ರಾಜ್ಯಗಳ ಗಣ್ಯರು ಭಾಗವಹಿಸಿದರು. ಡಿಕೆ ಶಿವಕುಮಾರ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿ ಸಂಭ್ರಮಾಚರಣೆ ನಡೆಸಿದರು.


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅಭಿವೃದ್ಧಿ ಮತ್ತು ಸುಶಾಸನಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ, ಕರ್ನಾಟಕದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಸಹಕಾರದಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿರುವ ಈ ನಾಯಕತ್ವ ಬದಲಾವಣೆಯ ಬಳಿಕ, ಮುಂದಿನ ದಿನಗಳಲ್ಲಿ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಕುರಿತು ಹೆಚ್ಚಿನ ಚರ್ಚೆ ನಡೆಯುವ ಸಾಧ್ಯತೆಯಿದೆ.