Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಜೈಲ್ ಭರೋ ಚಳುವಳಿ: ಮಂಗಳೂರಿನಲ್ಲಿ 280ಕ್ಕೂ ಹೆಚ್ಚು ಮಂದಿ ಬಂಧನ, ಬಿಡುಗಡೆ

ಜೈಲ್ ಭರೋ ಚಳುವಳಿ: ಮಂಗಳೂರಿನಲ್ಲಿ 280ಕ್ಕೂ ಹೆಚ್ಚು ಮಂದಿ ಬಂಧನ, ಬಿಡುಗಡೆ

ಮಂಗಳೂರು, ಆ.10: ರೈತ–ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ ನಡೆದ ಜೈಲ್ ಭರೋ ಚಳುವಳಿಯ ಭಾಗವಾಗಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸೋಮವಾರ ಪ್ರತಿಭಟನೆ ನಡೆಯಿತು. ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ಸಂಯುಕ್ತ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಜನಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಮಂದಿ ಭಾಗವಹಿಸಿದ್ದರು.

ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರೈತರು ಮತ್ತು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು, ಕಾರ್ಮಿಕರಿಗೆ ಕನಿಷ್ಠ ಕೂಲಿ ಖಾತ್ರಿಪಡಿಸಬೇಕು ಹಾಗೂ ರೈತರಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

‘ಕಾರ್ಪೊರೇಟ್‌ಗಳ ಪರ ಸರ್ಕಾರದ ನೀತಿ’

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ CITU ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿಗಳ ವಿರುದ್ಧ ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿತು. ಆದರೆ ಇಂದು ದೇಶದ ಸಂಪತ್ತು ಕಾರ್ಪೊರೇಟ್ ಕಂಪೆನಿಗಳ ಪಾಲಾಗುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ ಪ್ರಕಟಿಸುವ ವಿಚಾರದಲ್ಲಿಯೂ ಸರ್ಕಾರ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಅವರು ಟೀಕಿಸಿದರು. ಮೇ 22ರಂದು ಕನಿಷ್ಠ ಕೂಲಿ ಪ್ರಕಟಿಸಿದ ಬಳಿಕ ಮಾಲೀಕರ ಒತ್ತಡಕ್ಕೆ ಮಣಿದು ಅದನ್ನು ಮರುಪರಿಶೀಲಿಸುವ ಅಥವಾ ತಡೆಹಿಡಿಯುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

‘ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ’

ಕರ್ನಾಟಕ ಪ್ರಾಂತ ರೈತ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ. ಯಾದವ ಶೆಟ್ಟಿ ಮಾತನಾಡಿ, ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡು ಕಾರ್ಪೊರೇಟ್ ಕಂಪೆನಿಗಳಿಗೆ ನೀಡುವ ನೀತಿಗಳನ್ನು ವಿರೋಧಿಸಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸುವುದರ ಜೊತೆಗೆ ಯೋಜನೆಯನ್ನೇ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಗ್ರಾಮೀಣ ಜನರಿಗೆ ಉದ್ಯೋಗದ ಭದ್ರತೆ ಕಲ್ಪಿಸುವ ಯೋಜನೆಯನ್ನು ಬಲಪಡಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಟೀಕೆ

CITU ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬಿ.ಎಂ. ಭಟ್ ಮಾತನಾಡಿ, ದೇಶದ ಸಂಪತ್ತು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗಗಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ನೀತಿಗಳು ಪ್ರಜಾಪ್ರಭುತ್ವ ಮತ್ತು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತಿವೆ ಎಂದು ಅವರು ಟೀಕಿಸಿದರು.

280ಕ್ಕೂ ಹೆಚ್ಚು ಮಂದಿ ಬಂಧನ, ಬಳಿಕ ಬಿಡುಗಡೆ

ಪ್ರತಿಭಟನಾ ಸಭೆ ಮುಗಿದ ಬಳಿಕ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಪ್ರತಿಭಟನಾಕಾರರ ಪ್ರಕಾರ, 280ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಪ್ರತಿಭಟನೆಯಲ್ಲಿ CITU ಜಿಲ್ಲಾ ನಾಯಕರಾದ ಜೆ. ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಪದ್ಮಾವತಿ ಶೆಟ್ಟಿ, ಜಯಂತ ನಾಯಕ್, ರಮಣಿ ಮೂಡಬಿದ್ರೆ, ರಾಧಾ ಪುತ್ತಿಗೆ, ರವಿಚಂದ್ರ ಕೊಂಚಾಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಕರ್ನಾಟಕ ಪ್ರಾಂತ ರೈತ ಸಂಘ, DYFI, ಜನವಾದಿ ಮಹಿಳಾ ಸಂಘಟನೆ, ವಿಮಾ ನೌಕರರ ಸಂಘ, ದಲಿತ ಹಕ್ಕುಗಳ ಸಮಿತಿ, ಆದಿವಾಸಿ ಹಕ್ಕುಗಳ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ
##Mangalore #JailBharo #FarmersProtest #WorkersProtest #CITU #Karnataka #MangaloreNews #DakshinaKannada #ರೈತ_ಕಾರ್ಮಿಕ_ಹೋರಾಟ #ಜೈಲ್_ಭರೋ #ಮಂಗಳೂರು #ಪ್ರತಿಭಟನೆ #CITU #ಕರ್ನಾಟಕ #ದಕ್ಷಿಣಕನ್ನಡ ❖
Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading