ಪುಂಜಾಲಕಟ್ಟೆ, ಜೂನ್ 1: ಚಿಕ್ಕಪ್ಪನ ಮೇಲೆಯೇ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಪರಿಣಾಮ ಅವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಮಧುಸೂಧನ (38) ಎಂದು ಗುರುತಿಸಲಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾನೆ.
ಲಭ್ಯ ಮಾಹಿತಿಯ ಪ್ರಕಾರ, ಕೇಶವ ಪೂಜಾರಿ ಅವರ ಮನೆಯಲ್ಲಿ ಭಾನುವಾರ ರಾತ್ರಿ ದೈವದ ತಂಬಿಲ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ರಾಹುಲ್ ಸೇರಿದಂತೆ ಕೆಲ ಯುವಕರು ಮನೆಯ ಹೊರಭಾಗದಲ್ಲಿ ಮದ್ಯ ಸೇವಿಸಿ ಗದ್ದಲ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನು ಮಧುಸೂಧನ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ.
ಕೋಪಗೊಂಡ ರಾಹುಲ್, ಬಿಯರ್ ಬಾಟಲಿಯನ್ನು ಒಡೆದು ಅದರ ಚೂಪಾದ ಭಾಗದಿಂದ ಮಧುಸೂಧನ ಅವರ ಕುತ್ತಿಗೆಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಧುಸೂಧನ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಆರೋಪಿ ರಾಹುಲ್ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ಮಧುಸೂಧನ ಅವಿವಾಹಿತರಾಗಿದ್ದು, ಇಲೆಕ್ಟ್ರಿಷಿಯನ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಆರೋಪಿ ರಾಹುಲ್ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಈ ಪ್ರದೇಶದಲ್ಲಿ ಕೆಲ ಯುವಕರು ಗಾಂಜಾ ಸೇವನೆಯಂತಹ ದುಶ್ಚಟಗಳಿಗೆ ಒಳಗಾಗಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಘಟನೆಯ ಹಿಂದೆಯೂ ಇದರ ಪ್ರಭಾವ ಇರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಈ ಕುರಿತು ಪೊಲೀಸರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.